Add parallel Print Page Options

ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು. ಯೋಹಾನನ ಶಿಷ್ಯರು ಯೇಸುವಿಗೆ, “ಯೋಹಾನನು ಹೇಳಿದ್ದಂತೆ ಬರಬೇಕಾಗಿದ್ದವನು ನೀನೋ ಅಥವಾ ಬೇರೊಬ್ಬನಿಗಾಗಿ ನಾವು ಎದುರುನೋಡಬೇಕೋ?” ಎಂದು ಕೇಳಿದರು.

ಅದಕ್ಕೆ ಯೇಸು, “ನೀವು ಇಲ್ಲಿ ಕೇಳಿದ ಮತ್ತು ನೋಡಿದ ಸಂಗತಿಗಳನ್ನು ಯೋಹಾನನಿಗೆ ತಿಳಿಸಿರಿ. ಕುರುಡರು ದೃಷ್ಟಿ ಹೊಂದುತ್ತಾರೆ; ಕುಂಟರು ಮತ್ತೆ ನಡೆದಾಡಲು ಸಮರ್ಥರಾಗುತ್ತಾರೆ; ಕುಷ್ಟರೋಗಿಗಳು ಗುಣಹೊಂದುತ್ತಾರೆ; ಕಿವುಡರು ಕೇಳಲು ಸಮರ್ಥರಾಗುತ್ತಾರೆ; ಸತ್ತವರು ಜೀವವನ್ನು ಹೊಂದುತ್ತಾರೆ ಮತ್ತು ಬಡಜನರಿಗೆ ಶುಭವಾರ್ತೆಯನ್ನು ಹೇಳಲಾಗುತ್ತದೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ಧನ್ಯನಾಗಿದ್ದಾನೆ” ಎಂದು ಉತ್ತರಕೊಟ್ಟನು.

ಯೋಹಾನನ ಶಿಷ್ಯರು ಹೊರಟುಹೋಗುತ್ತಿರಲು ಯೇಸುವು ಜನರೊಡನೆ ಯೋಹಾನನನ್ನು ಕುರಿತು ಮಾತನಾಡಲು ಪ್ರಾರಂಭಿಸಿದನು. ಯೇಸು, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? ಇಲ್ಲ! ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ. ಹಾಗಾದರೆ, ಏನನ್ನು ನೋಡಲು ಹೋಗಿದ್ದಿರಿ? ಒಬ್ಬ ಪ್ರವಾದಿಯನ್ನೋ? ಹೌದು! ಯೋಹಾನನು ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ. 10 ಯೋಹಾನನನ್ನು ಕುರಿತು ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ:

‘ಇಗೋ! ನಾನು (ದೇವರು) ನನ್ನ ದೂತನನ್ನು ನಿನಗಿಂತ ಮೊದಲು ಕಳುಹಿಸುತ್ತೇನೆ.
ಅವನು ನಿನಗೆ ದಾರಿಯನ್ನು ಸಿದ್ಧಮಾಡುತ್ತಾನೆ.’(A)

11 “ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. 12 ಸ್ನಾನಿಕ ಯೋಹಾನನು ಬಂದ ಸಮಯದಿಂದ ಇಲ್ಲಿಯವರೆಗೂ ಪರಲೋಕರಾಜ್ಯ ಪ್ರಬಲವಾದ ಆಕ್ರಮಣಗಳಿಗೆ ಒಳಗಾಗಿದೆ. ಬಲಾತ್ಕಾರವನ್ನು ಉಪಯೋಗಿಸಿ ಜನರು ರಾಜ್ಯವನ್ನು ಪಡೆದುಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಾರೆ. 13 ಎಲ್ಲಾ ಪ್ರವಾದನೆಗಳು ಮತ್ತು ಮೋಶೆಯ ಧರ್ಮಶಾಸ್ತ್ರವು ಯೋಹಾನನು ಬರುವ ತನಕ ಪರಲೋಕರಾಜ್ಯದ ಕುರಿತಾಗಿ ಮುಂತಿಳಿಸಿದವು. 14 ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳು ಹೇಳಿದ್ದನ್ನು ನೀವು ನಂಬುವುದಾದರೆ ಈ ಯೋಹಾನನೇ ಎಲೀಯನು. ಅವನು ಬರುತ್ತಾನೆಂದು ಧರ್ಮಶಾಸ್ತ್ರವೂ ಹೇಳಿದೆ. 15 ಜನರೇ, ನಾನು ಹೇಳುವುದನ್ನು ಕೇಳಿರಿ. ಆಲಿಸಿರಿ!

16 “ಈ ಕಾಲದ ಜನರನ್ನು ಕುರಿತು ನಾನು ಏನು ಹೇಳಲಿ? ಅವರು ಯಾವ ರೀತಿ ಇದ್ದಾರೆ? ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಂತಿದ್ದಾರೆ. ಒಂದು ಗುಂಪಿನ ಮಕ್ಕಳು ಮತ್ತೊಂದು ಗುಂಪಿನ ಮಕ್ಕಳಿಗೆ ಹೀಗೆನ್ನುತ್ತಾರೆ:

17 ‘ನಾವು ನಿಮಗೋಸ್ಕರ ವಾದ್ಯ ಬಾರಿಸಿದೆವು.
    ನೀವು ಕುಣಿಯಲಿಲ್ಲ;
ನಾವು ಶೋಕಗೀತೆ ಹಾಡಿದೆವು,
    ನೀವು ದುಃಖಿಸಲಿಲ್ಲ.’

18 ಇಂದಿನ ಜನರು ಈ ಮಕ್ಕಳಂತಿದ್ದಾರೆ ಎಂದು ನಾನು ಹೇಳಿದ್ದೇಕೆ? ಏಕೆಂದರೆ ಯೋಹಾನನು ಬಂದನು. ಆದರೆ ಅವನು ಬೇರೆ ಜನರಂತೆ ಊಟಮಾಡಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ಜನರು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತಾರೆ.’ 19 ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.”

Read full chapter