ಮತ್ತಾಯ 14:22-33
Kannada Holy Bible: Easy-to-Read Version
ಸರೋವರದ ಮೇಲೆ ಯೇಸುವಿನ ಕಾಲುನಡಿಗೆ
(ಮಾರ್ಕ 6:45-52; ಯೋಹಾನ 6:15-21)
22 ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು. 23 ಆತನು ಜನರಿಗೆ ಶುಭವನ್ನು ಕೋರಿ ಕಳುಹಿಸಿದ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ತಾನೊಬ್ಬನೇ ಬೆಟ್ಟದ ಮೇಲಕ್ಕೆ ಹೋದನು. ಆಗಲೇ ರಾತ್ರಿಯಾಗಿತ್ತು. ಅಲ್ಲಿ ಆತನೊಬ್ಬನೇ ಇದ್ದನು. 24 ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.
25 ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು. 26 ನೀರಿನ ಮೇಲೆ ನಡೆದುಕೊಂಡು ಬರುತ್ತಿದ್ದ ಆತನನ್ನು ಕಂಡ ಶಿಷ್ಯರು ಭೂತವೆಂದು ಭಾವಿಸಿ ಭಯದಿಂದ ಕೂಗಿಕೊಂಡರು.
27 ಕೂಡಲೇ ಯೇಸು, “ಚಿಂತಿಸಬೇಡಿ! ನಾನೇ! ಭಯಪಡಬೇಡಿ” ಎಂದು ಅವರೊಂದಿಗೆ ಮಾತಾಡಿದನು.
28 ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು.
29 ಯೇಸು, “ಪೇತ್ರನೇ, ಬಾ” ಅಂದನು.
ಕೂಡಲೆ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ನೀರಿನ ಮೇಲೆ ನಡೆದನು. 30 ಆದರೆ ಅವನು ಗಾಳಿಯನ್ನು ಮತ್ತು ಅಲೆಗಳನ್ನು ನೋಡಿ ಭಯಪಟ್ಟದ್ದರಿಂದ ನೀರಿನಲ್ಲಿ ಮುಳುಗತೊಡಗಿ, “ಪ್ರಭುವೇ, ನನ್ನನ್ನು ರಕ್ಷಿಸು” ಎಂದು ಕೂಗಿಕೊಂಡನು.
31 ಯೇಸು ತನ್ನ ಕೈ ಚಾಚಿ ಪೇತ್ರನನ್ನು ಹಿಡಿದುಕೊಂಡನು. ಯೇಸು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದನು.
32 ಪೇತ್ರನು ಮತ್ತು ಯೇಸು ದೋಣಿ ಹತ್ತಿದ ಮೇಲೆ ಗಾಳಿ ಶಾಂತವಾಯಿತು. 33 ದೋಣಿಯಲ್ಲಿದ್ದ ಶಿಷ್ಯರು ಯೇಸುವನ್ನು ಆರಾಧಿಸಿ, “ನೀನು ನಿಜವಾಗಿಯೂ ದೇವರ ಮಗನು” ಎಂದು ಹೇಳಿದರು.
Read full chapterKannada Holy Bible: Easy-to-Read Version. All rights reserved. © 1997 Bible League International