Add parallel Print Page Options

ಯೇಸುವಿನ ಕುರಿತು ಹೆರೋದನ ಅಭಿಪ್ರಾಯ

(ಮಾರ್ಕ 6:14-29; ಲೂಕ 9:7-9)

14 ಆ ಕಾಲದಲ್ಲಿ ಹೆರೋದನು ಗಲಿಲಾಯದಲ್ಲಿ ಆಳುತ್ತಿದ್ದನು. ಜನರು ಯೇಸುವಿನ ಕುರಿತು ಹೇಳುತ್ತಿದ್ದ ಸಂಗತಿಗಳೆಲ್ಲ ಅವನಿಗೆ ತಿಳಿಯಿತು. ಆದ್ದರಿಂದ ಹೆರೋದನು ತನ್ನ ಸೇವಕರಿಗೆ, “ನಿಜವಾಗಿಯೂ ಯೇಸುವೇ ಸ್ನಾನಿಕ ಯೋಹಾನನು. ಅವನು ಮತ್ತೆ ಜೀವಂತವಾಗಿ ಬಂದಿದ್ದಾನೆ. ಆದಕಾರಣವೇ ಅವನು ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದನು.

ಸ್ನಾನಿಕ ಯೋಹಾನನು ಕೊಲ್ಲಲ್ಪಟ್ಟ ರೀತಿ

ಈ ಸಮಯಕ್ಕೆ ಮೊದಲೇ ಹೆರೋದ್ಯಳ ನಿಮಿತ್ತವಾಗಿ ಹೆರೋದನು ಯೋಹಾನನನ್ನು ಸರಪಣಿಗಳಿಂದ ಬಂಧಿಸಿ, ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳು ಹೆರೋದನ ಸಹೋದರನಾದ ಫಿಲಿಪ್ಪನ ಹೆಂಡತಿ. ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ. ಹೆರೋದನು ಯೋಹಾನನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟು ಕೊಲ್ಲಿಸಿರಲಿಲ್ಲ. ಜನರು ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರು.

ಹೆರೋದನ ಹುಟ್ಟುಹಬ್ಬದ ದಿನದಂದು ಹೆರೋದ್ಯಳ ಮಗಳು ಹೆರೋದನ ಮತ್ತು ಅವನ ಅತಿಥಿಗಳ ಮುಂದೆ ನರ್ತಿಸಿದಳು. ಹೆರೋದನು ಅವಳನ್ನು ಬಹಳ ಮೆಚ್ಚಿಕೊಂಡನು. ಆದ್ದರಿಂದ ಅವನು, “ನಿನಗೆ ಏನು ಬೇಕಾದರೂ ನಾನು ಕೊಡುತ್ತೇನೆ” ಎಂದು ಅವಳಿಗೆ ವಾಗ್ದಾನ ಮಾಡಿದನು. ಏನು ಕೇಳಿಕೊಳ್ಳಬೇಕೆಂದು ಹೆರೋದ್ಯಳು ತನ್ನ ಮಗಳಿಗೆ ಹೇಳಿಕೊಟ್ಟಳು. ಆದ್ದರಿಂದ ಅವಳು ಹೆರೋದನಿಗೆ, “ಸ್ನಾನಿಕ ಯೋಹಾನನ ತಲೆಯನ್ನು ಇಲ್ಲಿಯೇ ಈ ತಟ್ಟೆಯ ಮೇಲೆಯೇ ನನಗೆ ಕೊಡು” ಎಂದು ಹೇಳಿದಳು.

ರಾಜ ಹೆರೋದನು ಬಹಳವಾಗಿ ದುಃಖಪಟ್ಟನು. ಆದರೆ ಏನು ಕೇಳಿದರೂ ಕೊಡುತ್ತೇನೆಂದು ಅವನು ಅವಳಿಗೆ ವಾಗ್ದಾನ ಮಾಡಿದ್ದನು. ಹೆರೋದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದವರು ಸಹ ಆ ವಾಗ್ದಾನವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ಕೊಡುವುದಕ್ಕೆ ಹೆರೋದನು ಅಪ್ಪಣೆಕೊಟ್ಟನು. 10 ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿಕೊಂಡು ಬರಲು ಅವನು ಸೈನಿಕರನ್ನು ಕಳುಹಿಸಿಕೊಟ್ಟನು. 11 ಅವರು ಯೋಹಾನನ ತಲೆಯನ್ನು ತಟ್ಟೆಯ ಮೇಲೆ ತಂದು ಅವಳಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯಾದ ಹೆರೋದ್ಯಳ ಬಳಿಗೆ ತೆಗೆದುಕೊಂಡು ಹೋದಳು. 12 ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಸಮಾಧಿ ಮಾಡಿದರು. ಬಳಿಕ ಅವರು ಯೇಸುವಿನ ಬಳಿಗೆ ಹೋಗಿ ಸಂಭವಿಸಿದ್ದನ್ನೆಲ್ಲ ತಿಳಿಸಿದರು.

Read full chapter