ಮತ್ತಾಯ 26:57-68
Kannada Holy Bible: Easy-to-Read Version
ಯೆಹೂದ್ಯ ನಾಯಕರ ಎದುರಿನಲ್ಲಿ ಯೇಸು
(ಮಾರ್ಕ 14:53-65; ಲೂಕ 22:54-55,63-71; ಯೋಹಾನ 18:13-14,19-24)
57 ಬಳಿಕ ಯೇಸುವನ್ನು ಬಂಧಿಸಿದ್ದವರು ಆತನನ್ನು ಪ್ರಧಾನ ಯಾಜಕನಾದ ಕಾಯಫನ ಮನೆಗೆ ಕರೆದೊಯ್ದರು. ಅಲ್ಲಿ ಧರ್ಮೋಪದೇಶಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ಒಟ್ಟಿಗೆ ಸೇರಿದ್ದರು. 58 ಯೇಸುವಿಗೆ ಏನಾಗುತ್ತದೋ ಎಂಬುದನ್ನು ನೋಡಲು ಪೇತ್ರನು ಆತನನ್ನು ದೂರದಿಂದ ಹಿಂಬಾಲಿಸುತ್ತಾ ಪ್ರಧಾನಯಾಜಕನ ಭವನದ ಅಂಗಳದೊಳಗೆ ಬಂದು ಕಾವಲುಗಾರರೊಂದಿಗೆ ಕುಳಿತುಕೊಂಡನು.
59 ಮಹಾಯಾಜಕರು ಮತ್ತು ಯೆಹೂದ್ಯರ ಸಮಿತಿಯವರು ಯೇಸುವಿಗೆ ಮರಣದಂಡನೆ ವಿಧಿಸಲು ಅಗತ್ಯವಾದ ಸುಳ್ಳುಸಾಕ್ಷಿಗಳನ್ನು ಹುಡುಕಿದರು. 60 ಅನೇಕರು ಬಂದು, ಯೇಸುವಿನ ವಿಷಯವಾಗಿ ಸುಳ್ಳು ಸಂಗತಿಗಳನ್ನು ಹೇಳಿದರು. ಆದರೆ ಯೇಸುವನ್ನು ಕೊಲ್ಲಲು ಬಲವಾದ ಕಾರಣವೊಂದೂ ಸಮಿತಿಗೆ ಸಿಗಲಿಲ್ಲ. ಆಗ ಇಬ್ಬರು ಬಂದು, 61 “ಈ ಮನುಷ್ಯನು, ‘ನಾನು ದೇವರ ಆಲಯವನ್ನು ಕೆಡವಿ ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ’ ಎಂದು ಹೇಳಿದನು” ಎಂಬುದಾಗಿ ತಿಳಿಸಿದರು.
62 ಪ್ರಧಾನಯಾಜಕನು ಎದ್ದುನಿಂತು ಯೇಸುವಿಗೆ, “ಈ ಜನರು ನಿನ್ನ ಮೇಲೆ ಹೊರಿಸಿರುವ ಆಪಾದನೆಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯಾ? ಇವರು ಹೇಳುತ್ತಿರುವುದೆಲ್ಲಾ ನಿಜವೇ?” ಎಂದು ಕೇಳಿದನು. 63 ಆದರೆ ಯೇಸು ಮೌನವಾಗಿದ್ದನು.
ಪ್ರಧಾನಯಾಜಕನು ಮತ್ತೆ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದೇನೆ, ನೀನು ದೇವಕುಮಾರನಾದ ಕ್ರಿಸ್ತನೋ? ನಮಗೆ ತಿಳಿಸು” ಎಂದನು.
64 ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು. ಆದರೆ ನಿನಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೋಡಗಳ ಮೇಲೆ ಕುಳಿತು ಬರುವುದನ್ನೂ ನೀವು ಕಾಣುವಿರಿ” ಎಂದು ಹೇಳಿದನು.
65 ಪ್ರಧಾನಯಾಜಕನು ಇದನ್ನು ಕೇಳಿ ಬಹಳ ಕೋಪಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈ ಮನುಷ್ಯನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಯಾವ ಸಾಕ್ಷಿಗಳ ಅಗತ್ಯವೂ ಇಲ್ಲ. ಇವನು ಮಾಡಿದ ದೇವದೂಷಣೆಯನ್ನು ನೀವೇ ಕೇಳಿದಿರಿ. 66 ನಿಮ್ಮ ತೀರ್ಮಾನವೇನು?” ಎಂದು ಕೇಳಿದನು.
ಯೆಹೂದ್ಯರು, “ಇವನು ಅಪರಾಧಿ. ಇವನು ಸಾಯಲೇಬೇಕು” ಎಂದು ಉತ್ತರಕೊಟ್ಟರು.
67 ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು. 68 ಅವರು, “ಕ್ರಿಸ್ತನೇ, ನಮಗೆ ಪ್ರವಾದನೆ ಹೇಳು! ನಿನಗೆ ಹೊಡೆದವರು ಯಾರು?” ಎಂದು ಅಪಹಾಸ್ಯ ಮಾಡಿದರು.
Read full chapterKannada Holy Bible: Easy-to-Read Version. All rights reserved. © 1997 Bible League International